Advertisement
ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು

ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು

ಇರುವೆ ಎಲೆ ಮತ್ತು ನದಿ

ಅದು ಹಾಗೇನೆ ಒಂದು ಬೀಳಲೆಬೇಕು
ಹಾಗೇನೆ ಇನ್ನೊಂದು ಏಳಲೇ ಬೇಕು
ಇರುವೆ ಎಂದವರು ಇರದಂತಾಗಿ
ಇಲ್ಲ ಎಂದವರು ಇದ್ದವರಂತಾಗಿ
ಗಾಳಿ ಹೊಡೆತ ಮಣ್ಣ ಕುಸಿತಕೆ ಹಾ….
ರಿ

ನದಿಗೆ ಬಿದ್ದ ಜೀವ ಈ ಇರುವೆ
ತತ್ತರಿಸಿಹೋದ ಹಗುರ ಜೀವ
ಇರಲೋ ಇರದಂತಾಗಲೋ
ಇರವಿನ ಸಮರಕಾಗಿ ಎದ್ದು ಬಿದ್ದು
ತೇಲಿ ಮುಳುಗಿ ಮೂಗು ಗಂಟಲತುಂಬ
ನೀರು ತುಂಬಿ ಉಸಿರು ದಿಕ್ಕಾಪಾಲು

ಈ ಎಲೆಯೂ ಹಾಗೇನೆ
ಇರುವೆಗಾಗಿ ಇರುವೆ ಎಂದು
ಬಿದ್ದಹಾಗೆ ನದಿಗೆ.
ಪತರಗುಟ್ಟುವ ಇರುವೆ ಜೀವಕೆ
ನಾನಿರುವೆ ನಾನಿರುವೆ ಎಂದು ಬಿದ್ದ ಭಾವ
ಎಲೆ ಇರುವೆ ಎಲೆ ಇರುವೆ ನಾನಿರುವೆ.

ಕುಕ್ಕರಗಾಲಲಿ ಕೂತ ಒದ್ದೆ ಜೀವ
ಎಲೆ ದೋಣಿಯಾದ ಪಯಣದಲಿ
ಹಿಡಿಯಷ್ಟು ಋಣ
ಎಲೆ ನದಿಗೆ ಉದುರಿದ್ದೆ ಇರುವೆಯ ಇರುವಿಗೆ
ಇರುವೆಯ ಹೊತ್ತೊಯ್ಯುವ ಹೆಗಲಾಗಿ
ಪಲ್ಲಕ್ಕಿ ಆದ ಒಣ ಜೀವ

ನೋಡಿ
ಹೇಗೆ ಹೊತ್ತೊಯ್ಯತಿದೆ ಒಣ ಎಲೆ
ನೆನೆದ ಜೀವಕೆ ಮತ್ತೆ ಹಸಿರಾದ ಭಾವ
ಕಣ್ಣ ಪಿಳಿಕಿಸುತ್ತ ಕೂತ ಇರುವೆ ರೆಪ್ಪೆಗಳ ಮೇಲೆ
ಬದುಕಿನ ಪಯಣ
ಒಣ ಎಲೆ ಬಿದ್ದು ಮತ್ತೆ ಎದ್ದಂತಾಗಿ
ಇರುವೆ ನದಿಯೊಳಗೆ ಬೀಳುವುದಕೂ
ಒಣ ಎಲೆ ಕಳಚಿ ನದಿಗೆ ಬೀಳುವುದಕೂ
ಬೇಕು ಯೋಗ
ಅದು ಹಾಗೇನೆ ಒಂದರ ಬೀಳು
ಮತ್ತೊಂದರ ಏಳು

 

ನಾನೆಂಬ ನನ್ನೊಳಗಿನ ಜೀವ ಬಂಧುವಿಗೆ

ನಿನ್ನೊಡನೆ ಮಾತಾಡಿ ಎನಿತು ಕಾಲವಾಗಿತ್ತು ಬಂಧು
ಬಂದು ಹೋಗುವ ಬಂಧಗಳಲಿ ದೂರಮಾಡಿದ್ದೆ
ನಿನ್ನ ನೀನೆಂಬ ಉಸಿರ ಶಾಶ್ವತ ಬಂಧುರವನು
ಕಲ್ಲು ಕಟ್ಟಿ ಆಳದಲಿ ಕುಕ್ಕಿ ಬಂದಿದ್ದೆ
ಬಾ ಮುಖಾ ಮುಖಿ ಕೂತು ಬಿಡು
ಪಟ್ಟಾಂಗ ಚಕ್ಕಮಕ್ಕಳ ಹಾಗೆ ಮಾತಾಡೋಣ
ಹೃದಯಗಳನು ಪರಸ್ಪರ ಕಿತ್ತಿಟ್ಟು ನೆಲದಮೇಲೆ
ಆಕಾಶದ ನಕ್ಷತ್ರಗಳನು ಬಿತ್ತೋಣ
ಧರಿಸೋಣ ಬದಲಾಯಿಸಿಕೊಂಡು
ನಿನ್ನ ಹೃದಯದ ಕಿರೀಟ ನಾನು
ನನ್ನ ಬುದ್ಧಿಯ ಕವಚ ನೀನು
ನಿಂತರೂ ಭಯವಿಲ್ಲ ಎದುರು
ಅಕ್ಷ ಅಕ್ಷೋಹಿಣಿ ಸೈನ್ಯದ ತೆರೆ
ನೀನಿರು ಬಂಧು ನಾನೆಂಬ ನನ್ನ ಬಂಧು
ಬಂದರುಗಳಲಿ ಹೇಗೆ ನಿಲ್ಲುತ್ತದೊ ನೋಡುವೆ
ದಣಿದ ಹಡಗು.

ನಿನ್ನೊಡನೆ ಮಾತಾಡಿ ಎನಿತು ಕಾಲವಾಗಿತ್ತೋ ಬಂಧು
“ಕಂಡ ರೂಪಕಿಂತ ಕಾಣದೊಡವೆ” ಗೀಳೆ ಬಾಳಾಗಿತ್ತು
ಸುಮ್ಮನೆ ಹರಾಜಿಗಿಟ್ಟಿದ್ದೆ ಆತ್ಮವನು
ಬಿಕರಿಗೆ ಇಟ್ಟು ಕೂತಿದ್ದೆ ಒಳಕೋಣೆಯನು
ನನ್ನೊಳಗಿನ ಬಂಧು ಬಂದು ನಿಲ್ಲಯ್ಯ ನೀನು
“ವಿವಶವಾಗದಿರಲಿ ಜೀವನ ಪರವಶವಾಗದಿರಲಿ”
ನಾನುಗಾವುದ ಗಾವುದದಾಚೆ ನಡೆದು ಬಂದಿದ್ದೇನೆ
ನನ್ನನು ನಾನು ಅಲ್ಲಲ್ಲಿ ಕತ್ತರಿಸಿಟ್ಟು
ಚೆಲ್ಲಾಪಿಲ್ಲಿಯಾದ ತುಣುಕುಗಳನೆಲ್ಲ ಸೇರಿಸು
ನನಗೆ ನಾನು ದೊರೆತರೆ ದೊರೆ
ಅರೆ ಅರೆ ನೋಡು ಅರೆತೆರೆದ ನನ್ನ ಕಣ್ಣುಗಳಲಿ
ಸೂರ್ಯ ಚಿಮ್ಮುತ್ತಿದ್ದಾನೆ ಚಂದ್ರ ಮುಗುಳ್ನಗು
ಮೆದುಳಿನ ತುಂಬೆಲ್ಲ ನಕ್ಷತ್ರ ಹರಿ ಬಿಟ್ಟು ಕೊಂಡಿದ್ದೇನೆ
ಕತ್ತಲಿಗೂ ಈಗ ನೂರು ಬೆಳಕಿನರ್ಥ

ನಿನ್ನೊಡನೆ ಮಾತಾಡದೆ ಎನಿತು ಕಾಲವಾಗಿತ್ತೂ ಬಂಧು
ಕೊಳೆತು ಹೋಗುವ ಹೃದಯದೊಳಗೆ
ಕಾಮನ ಬಿಲ್ಲ ಬಿತ್ತೋಣ ಬಾ.

(ಇಲ್ಲಸ್ಟ್ರೇಷನ್ ಕಲೆ: ರೂಪಶ್ರೀ ಕಲ್ಲಿಗನೂರ್)

About The Author

ವಾಸುದೇವ ನಾಡಿಗ್

ವಾಸುದೇವ ನಾಡಿಗ್ ಮೂಲತಃ ಶಿವಮೊಗ್ಗದ ಭದ್ರಾವತಿಯವರು. ಕುವೆಂಪು ವಿವಿಯಿಂದ ಕನ್ನಡ ಸ್ನಾತಕೋತ್ತರ ಪದವಿ ಹಾಗೂ ತುಮಕೂರು ಸಿದ್ದಗಂಗಾ ಶಿಕ್ಷಣ ಮಹಾವಿದ್ಯಾಲಯ ದಲಿ ಬಿ. ಎಡ್. ಪದವಿ ಪಡೆದಿದ್ದಾರೆ. ೨೦ ವರ್ಷಗಳಿಂದ ಜವಾಹರ ನವೋದಯ ವಿದ್ಯಾಲಯದಲಿ ಕನ್ನಡ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃಷಭಾಚಲದ ಕನಸು, ಹೊಸ್ತಿಲು ಹಿಮಾಲಯದ ಮಧ್ಯೆ, ಭವದ ಹಕ್ಕಿ, ನಿನ್ನ ಧ್ಯಾನದ ಹಣತೆ, ವಿರಕ್ತರ ಬಟ್ಟೆಗಳು, ಅಲೆ ತಾಕಿದರೆ ದಡ, ಅವನ ಕರವಸ್ತ್ರ ಅನುಕ್ತ ( ಈವರೆಗಿನ ಕವಿತೆಗಳು) ಇವರ ಪ್ರಕಟಿತ ಕವನ ಸಂಕಲನಗಳು. ಬೇಂದ್ರೆ ಅಡಿಗ, ಕಡೆಂಗೋಡ್ಲು ಶಂಕರಭಟ್ಟ, ಮುದ್ದಣ, ಜಿ ಎಸ್ ಎಸ್ ಕಾವ್ಯ ಪ್ರಶಸ್ತಿ ಇವರಿಗೆ ದೊರೆತಿವೆ.

Leave a comment

Your email address will not be published. Required fields are marked *


ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ