Advertisement
ಸುಮಿತ್‌ ಮೇತ್ರಿ ಬರೆದ ಹೊಸ ಕವಿತೆ

ಸುಮಿತ್‌ ಮೇತ್ರಿ ಬರೆದ ಹೊಸ ಕವಿತೆ

ಧ್ಯಾನಕ್ಕೆ ಗುಹೆ ಬೇಕಿಲ್ಲ

ನಿಶ್ಯಬ್ದ ಪ್ರಾರ್ಥನೆಯ
ಮಾಯಾ ಬಜಾರಿನ ಮುಂದೆ
ದುಬಾರಿ ಪಾದರಕ್ಷೆಗಳ ಸಣ್ಣ ಸದ್ದು
ಕಾಲದ ದಿವ್ಯ ನಿರ್ಲಕ್ಷ್ಯ
ಪಯಣ ಸುದೀರ್ಘ ಎನಿಸಲು
ಆಟಿಕೆಗಳು ಆಗಂತುಕವಾಗಿ ಮುರಿದು ಬಿಡುತ್ತೇವೆ

ಮಿಣುಕು ಮಿಣುಕು ಮಿಂಚಿನ
ಕಣ್ಣುಗಳಲ್ಲಿ
ಪರಿಚಯ ಆಗಿಬಿಡುವ ಮೊದಲೇ
ಮಾತು ಬಿಕ್ಕಳಿಸಿ ಮೌನ ಉಸಿರಾಡುತ್ತಾ
ಏಕಾಂತಕ್ಕೆ ಜಾರುತ್ತೇನೆ
ಅಳಿವು ಉಳಿವು ಹುಟ್ಟು ಸಾವಿನ ದೌಲತ್ತಿನ ಮುಂದೆ
ಉತ್ತರಿಸುವುದೆ ಅಂತಿಮವಲ್ಲ
ಪ್ರಶ್ನೆಗಳ ಸುರಿಮಳೆ ನಿಲ್ಲಿಸಲಾಗದು

ದುಖಾನಿನಿಂದ ದೂರವಾಗಿ ಉಳಿದರು
ಕೇಳದ ಹೃದಯಗಳ ಕಂಪನ
ಚೆಲ್ಲಾಪಿಲ್ಲಿಯಾಗಿ ಬಿದ್ದ ಕನಸುಗಳು
ಎದೆಯಲ್ಲಿ ಮುರಿದ ಮುಳ್ಳೊಂದು
ತೂಕದ ಕಲ್ಲುಗಳನ್ನು ನಂಬಿದ ತಕ್ಕಡಿ ಪರಡೆ
ಹಸಿದ ಹಸಿವಿಗೆ ಹಸಿವೇ ಉಣಿಸಿದ
ಹಸಿವು ಕೂಡ ಇಲ್ಲಿ ತೀರ ಕ್ಷಣಿಕ

ಬಸವನ ಹುಳುವಿಗೆ ಮೂಡಿದ ರೆಕ್ಕೆಯ
ಅಪೀಲ್ ಅರ್ಜಿ ಗುಜರಾಯಿಸಿ
ಸತ್ಯಕ್ಕೆ ಬಣ್ಣ ಬಳಿದ ದಾಸ್ತಾನಿನ ಗೋದಾಮು
ಆರೋಗ್ಯ ಕರ
ವಾದ ಒಂದು ದಿನ ಸಾಕು
ದೇವರನ್ನು ಇನ್ನೆಷ್ಟು ಸಿಂಗರಿಸುವುದು
ಮೃತ್ಯುವನ್ನು ಚುಂಬಿಸಿದರು
ಕಾಲ ನಮ್ಮ ಪರವಾಗಿರಲು ವಿಷವೂ ಅಮೃತವಾಗುತ್ತದೆ

ಶತಮಾನಗಳಿಂದ ಹರಿಯುವ ನದಿ
ಇಲ್ಲವಾಗುವ ಸೂಚನೆ
ಗ್ರಹಣ ಹಿಡಿದ ಕಣ್ಣುಗಳು
ಮುಕ್ತ ಆಕಾಶದಲ್ಲಿ ಕಳೆಗುಂದಿದ ಸೂರ್ಯ
ಹೃದಯದ ನಾಲ್ಕು ಕೋಣೆಗಳ
ದುರಸ್ತಿ ಕಾಮಗಾರಿ ಪರಿಶೀಲನೆಯಲ್ಲಿದೆ
ಈ ಧ್ಯಾನಸ್ಥ ಸ್ಥಿತಿಯಲ್ಲೂ ಕವಿಯ ಕಣ್ಣಲ್ಲಿ ಆತಂಕ ಆವರಿಸಿದೆ

ಮೈಲಿಗಲ್ಲುಗಳ ಎಣಿಸುತ್ತಾ ಎಣಿಸುತ್ತಾ
ಲೆಕ್ಕ ತಪ್ಪಿದ ಮಳೆಗಾಲದ ಮಳೆ
ಹಾರುವ ಹಕ್ಕಿಗಳ ತಪ್ಪಿದ ದಾರಿ
ನನಗೂ ರೆಕ್ಕೆ ಇರಬಾರದಿತ್ತೇ?
ಸಾಲು ಮರೆತ ಇರುವೆ ಹಿಂಡಿನ
ಕೂಗು ಕೇಳಿ ಬರಲು
ಕಲ್ಲುಗಳಿಗೆ ಈಗ ಮೊದಲಿನಂತೆ ಹಣ್ಣುಗಳು ಉದುರುವುದಿಲ್ಲ
ಇನ್ನೂ ಈ ಋತುವಿನಲ್ಲಿ ಯಾವ ಹೂವು ಬೆಳೆಯಲಿ

ಜಗವ ಕಾಯುವ ಪತ್ತೆದಾರಿ ಮಹಾನೇತ್ರ
ಕನ್ನಡಿಯಿಂದ ಕನ್ನಡಿಗೆ ಪ್ರತಿಬಿಂಬಿತ
ಹೊಂಚು ಹಾಕುವ ಪ್ರತಿಫಲಿತ ಕನ್ನಡಿಗಳು
ನಿರ್ಜೀವ ಪ್ರತಿಮೆಯ ದೇವರೇ
ಸುಮ್ಮನಿದ್ದು ಬಿಡು
ಸದ್ದು ಕೇಳುತ್ತಲೇ ಇದ್ದೇವೆ
ಮಗುವಿನ ಸದ್ದು ಕನ್ಯೆಯ ಸದ್ದು ಹಸಿದ ಹೊಟ್ಟೆಯ ಸದ್ದು
ಏಕೆ ನಾನು ನಿನ್ನನ್ನೇ ಅವಗಾಹನಿಸಿಕೊಂಡು ದಿಟ್ಟಿಸುತ್ತಾ ಕೂಡಬೇಕು

ಪುಣ್ಯ ಪುರುಷನ ಅಗೋಚರ ಉಪಸ್ಥಿತಿ
ಕಣ್ಣು ಮೂಗು ತುಟಿ ಕಿವಿ
ಮೊಲೆ ಶಿಶ್ನ ಯೋನಿ
ಕತ್ತರಿಸುವ ಹೊಲೆಯುವ ಬೀಳಿಸುವ ಕಟ್ಟುವ ಕಾಯಕ
ಬಣ್ಣ ಬಣ್ಣದ ದಾರದಿಂದ
ಹೊಲಿಗೆ ಹಾಕುವ ನಿಯೋಜಿತ ತುಕಡಿ
ಸುಟ್ಟು ಕರಕಲಾದ ಹಕ್ಕಳೆಗಟ್ಟಿದ ಗಾಯದ ಚರ್ಮ

ಪುರಾವೆಗೆ ಗಾಳಿಯ ಮೂಟೆ ಕಟ್ಟಿಸುವ ತೀರ್ಪು
ಕೆಂಪು ಕಟ್ಟಡದಲ್ಲಿ
ಪವಿತ್ರ ಗ್ರಂಥ ಮೇಲೆ ಆಣೆ ಮಾಡಿಸುವಾಗ
ನನ್ನ ಕವಿತೆಯನೊಮ್ಮೆ ಓದಬೇಕು
ಸಾಕ್ಷ್ಯಿ ಎಂದೂ ಅಂಗೀಕರಿಸಲಾರದ
ನಿನ್ನ ನಿಸ್ಸಾಹಾಯಕೆ ಸಹಾನುಭೂತಿ ಇದ್ದೇ ಇದೆ

ಗಾಯಗಳಿಗೆ ಸಾಕ್ಷಿ ಹೇಳುವ
ಪಾದದ ಗುರುತುಗಳು
ಧ್ಯಾನಕ್ಕೆ ಗುಹೆಯೇ ಬೇಕಿಲ್ಲ
ಕಟ್ಟಕಡೆಯ ಪ್ರಜೆಗೆ ತಲುಪದ
ಜನತೆಯ ಕಣ್ಮಣಿಯೇ
ಆಕ್ರಂದನದ ಮೊರೆ ಕೇಳು
ಹಸಿವಾಗದಿರಲೆಂದು ದೇವರಲ್ಲಿ ಮೊರೆಯಿಟ್ಟೆ

ಒಲೆಯ ಧ್ಯಾನಸ್ಥ ಬೆಂಕಿ
ಬದುಕಿನ ಬಿದಾಯಿ ಕೊಡುವ ಘಳಿಗೆ
ಸುಳ್ಳು ಸತ್ಯವಾಗುವ ಸತ್ಯ ಸುಳ್ಳಾಗುವ
ಪ್ರತ್ಯಕ್ಷ ಕಂಡರೂ ಕಣ್ಣಲಿ
ತನ್ನನ್ನೇ ತಾನು ನೋಡುವ ದಾಖಲೆ ಕೇಳುವ ಕಾಲ

ಶಾರೀರಿಕ ಸಾವಿನ ಕಥೆ ಬಿಡಿ
ಮಾನಸಿಕ ಸಾವಿನ ಸಂಖ್ಯೆಯ ಲೆಕ್ಕವಿಡಿ
ಮಿದುಳಿಗೆ ಅಮಲಿನ ಬಾಣ ಬಿಟ್ಟು
ಕುಹಕ ನಗು ಉಕ್ಕಿಸಿ ಕುಲುಮೆ ಕಕ್ಕುವ ಹೊಗೆ
ಇದು ನಿರ್ನಾಮ ಇಲ್ಲವೇ ನಿರ್ಮಾಣ?
ಇಡೀ ಜೀವ ಸಂಕುಲದ ಸಾವಿನ ಸುದ್ದಿ ಕೇಳಲು
ಈ ನಿನ್ನ ಸದ್ದು ಶಾಶ್ವತವೇ ದೊರೆ!

ಸುಮಿತ್ ಮೇತ್ರಿ ವಿಜಯಪುರ ಜಿಲ್ಲೆಯ ಹಲಸಂಗಿಯವರು.
ಕವಿತೆ/ಲಹರಿ/ಕಥೆ/ಪ್ರಬಂಧಗಳು ಬರೆಯುವಲ್ಲಿ ಆಸಕ್ತಿ ಹೊಂದಿದ್ದಾರೆ.
ಫೋಟೋಗ್ರಾಫಿ ಅವರ ಮೆಚ್ಚಿನ ಹವ್ಯಾಸ.
ಸದ್ಯ ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

(ಕಲೆ: ರೂಪಶ್ರೀ ಕಲ್ಲಿಗನೂರ್)

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ